ಕಡಬ ಟೈಮ್ಸ್, ಪ್ರಮುಖ ಸುದ್ದಿ: ರಾಜ್ಯ ಬಿಜೆಪಿಯ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ನೇತೃತ್ವದ ರಾಜ್ಯ ಕೋರ್ ಕಮಿಟಿ ಕಳುಹಿಸಿದ್ದ ಮೂರು ಸಾಂಭಾವ್ಯ ಅಭ್ಯರ್ಥಿಗಳ ಹೆಸರುಗಳನ್ನು ಬಿಜೆಪಿ ಹೈಕಮಾಂಡ್ ತಿರಸ್ಕರಿಸಿ ರಾಜ್ಯಸಭಾ ಚುನಾವಣೆಗೆ ತನ್ನ ಹೊಸ ಅಭ್ಯರ್ಥಿಗಳನ್ನು ಆಯ್ಕೆ ಮಾಡಿ ಅಂತಿಮಗೊಳಿಸಿದೆ.
ಬಿಜೆಪಿಯ ಸಾಮಾನ್ಯ ಕಾರ್ಯಕರ್ತರಾದ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿ ರಾಜ್ಯಸಭೆ ಚುನಾವಣೆಗೆ ಬಿಜೆಪಿಯ ಅಧಿಕೃತ ಅಭ್ಯರ್ಥಿಗಳಾಗಿರುವುದು ವಿಶೇಷ. ಈ ಮೂಲಕ ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಪ್ರದೇಶಗಳಿಗೆ ಆದ್ಯತೆ ನೀಡಿದೆ. ರಾಜ್ಯಸಭಾ ಚುನಾವಣೆ ಟಿಕೆಟ್ ಗಾಗಿ ಬಿಜೆಪಿಯಲ್ಲಿ ಭಾರಿ ಪೈಪೋಟಿ ಕಂಡುಬಂದಿತ್ತು. ರಮೇಶ್ ಕತ್ತಿ , ಹಾಲಿ ರಾಜ್ಯಸಭಾ ಸಂಸದ ಪ್ರಭಾಕರ ಕೋರೆ ಯವರು ಕೂಡಾ ಪುನಾರಯ್ಕೆ ಬಯಸಿ ಟಿಕೆಟ್ ಆಕಾಂಕ್ಷೆ ಹೊಂದಿದ್ದರು.ಅಲ್ಲದೆ ಕರಾವಳಿ ಕರ್ನಾಟಕದ ಹೋಟೆಲ್ ಉದ್ಯಮಿ ಕೆ ಪ್ರಕಾಶ್ ಶೆಟ್ಟಿಯವರ ಹೆಸರು ಕೂಡಾ ಕೊನೆಯ ಕ್ಷಣದಲ್ಲಿ ಕೇಳಿ ಬಂದಿತ್ತು. ರಾಜ್ಯ ಬಿಜೆಪಿ ಈ ಮೂವರ ಹೆಸರನ್ನೂ ಹೊಸದಿಲ್ಲಿಗೆ ಶಿಫಾರಸ್ಸು ಮಾಡಿತ್ತು.
ಸದ್ಯ ರಾಜ್ಯಸಭೆಯ ನಾಲ್ಕು ಸ್ಥಾನಗಳಿಗೆ ಬಿಜೆಪಿಯಿಂದ ಈರಣ್ಣ ಕಡಾಡಿ ಮತ್ತು ಅಶೋಕ್ ಗಸ್ತಿಯವರು, ಕಾಂಗ್ರೆಸ್ ನಿಂದ ಮಲ್ಲಿಕಾರ್ಜುನ ಖರ್ಗೆಯವರು, ಜೆಡಿಎಸ್ ನಿಂದ ಕಾಂಗ್ರೆಸ್ ಬೆಂಬಲದೊಂದಿಗೆ ಎಚ್ ಡಿ ದೇವೇಗೌಡ ಅವರು ಕಣದಲ್ಲಿದ್ದಾರೆ.ಜೂನ್ 19ರಂದು ಚುನಾವಣೆ ನಡೆಯಲಿದ್ದು, ಇವರೆಲ್ಲರ ಅವಿರೋಧ ಆಯ್ಕೆ ಬಹುತೇಕ ಖಚಿತವಾಗಿದೆ.ವಿಧಾನಸಭೆಯಲ್ಲಿ 117 ಶಾಸಕರ ಬಲ ಹೊಂದಿರುವ ಬಿಜೆಪಿ 2 ಸ್ಥಾನದಲ್ಲಿ ಸುಲಭವಾಗಿ ಜಯಗಳಿಸಲಿದೆ.


